ಕಾರವಾರ: ಜಿಲ್ಲಾ ಸಶಸ್ತ್ರ ಮೀಸಲು ಪಡೆ (DAR) ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಒಬ್ಬರು ಕಚೇರಿಯಲ್ಲಿಯೇ ದಿಢೀರ್ ಅಸ್ವಸ್ಥಗೊಂಡು ಸಾ*ವನ್ನಪ್ಪಿರುವ ದಾರುಣ ಘಟನೆ ಕಾರವಾರದಲ್ಲಿ ನಡೆದಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ಮೃತರ ಹಿನ್ನೆಲೆ
ಮೃ*ತ ಪೊಲೀಸ್ ಸಿಬ್ಬಂದಿಯನ್ನು ಸುನೀಲ ಅಪ್ಪಣ್ಣ ಕೋಳಿ (46) ಎಂದು ಗುರುತಿಸಲಾಗಿದೆ. ಇವರು ಮೂಲತಃ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಮ್ಮಿನಬಾವಿ ಗ್ರಾಮದವರಾಗಿದ್ದು, ಪ್ರಸ್ತುತ ಕಾರವಾರದ ಡಿಎಆರ್ ಘಟಕದಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಕರ್ತವ್ಯದ ಮೇಲಿದ್ದಾಗಲೇ ಈ ದುರಂತ ಸಂಭವಿಸಿರುವುದು ಪೊಲೀಸ್ ವಲಯದಲ್ಲಿ ತೀವ್ರ ಆಘಾತ ಮೂಡಿಸಿದೆ.
ಘಟನೆ ನಡೆದಿದ್ದು ಹೇಗೆ?
ಪೊಲೀಸ್ ಇಲಾಖೆಯ ದಾಖಲೆಗಳ ಪ್ರಕಾರ, ಜೂನ್ 17ರಂದು ಬೆಳಗ್ಗೆಯಿಂದಲೇ ಸುನೀಲ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ತೀವ್ರ ಸುಸ್ತು ಮತ್ತು ಅಸ್ವಸ್ಥತೆ ಕಾಣಿಸಿಕೊಂಡಿದ್ದರಿಂದ ಅವರು ಡಿಎಆರ್ ಕಚೇರಿಯ ವಿಶ್ರಾಂತಿ ಕೊಠಡಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಮಧ್ಯಾಹ್ನ ಸುಮಾರು 3.30ರ ವೇಳೆಗೆ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟು ನರಳಾಡುತ್ತಿರುವುದನ್ನು ಸಹೋದ್ಯೋಗಿಗಳು ಗಮನಿಸಿದ್ದಾರೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ತಕ್ಷಣವೇ ಸುನೀಲ ಅವರನ್ನು ತುರ್ತು ಚಿಕಿತ್ಸೆಗಾಗಿ ಕಾರವಾರದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಮಧ್ಯಾಹ್ನ 3.55ರ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಿ ವೈದ್ಯರು ಪರೀಕ್ಷೆ ಮಾಡಿದಾಗ, ಅವರು ಆಸ್ಪತ್ರೆಗೆ ತಲುಪುವ ಮೊದಲೇ ಮೃ*ತಪಟ್ಟಿರುವುದು ದೃಢಪಟ್ಟಿದೆ.
ತಂದೆಯಿಂದ ದೂರು ದಾಖಲು
ಮೃತರ ತಂದೆ, ನಿವೃತ್ತ ಎಎಸ್ಐ ಆಗಿರುವ 87 ವರ್ಷದ ಅಪ್ಪಣ್ಣ ಉಡ್ಚಪ್ಪ ಕೋಳಿ ಅವರು ಈ ಘಟನೆ ಕುರಿತು ಕಾರವಾರ ಶಹರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಮ್ಮ ಮಗನ ದಿಢೀರ್ ಸಾವಿನ ಬಗ್ಗೆ ತಮಗೆ ಯಾವುದೇ ರೀತಿಯ ಅನುಮಾನಗಳಿಲ್ಲ ಎಂದು ಅವರು ದೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಆ ಪ್ರಕ್ರಿಯೆ ಮುಗಿದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಕಾರವಾರ ಶಹರ ಪೊಲೀಸ್ ಠಾಣೆಯಲ್ಲಿ ಯುಡಿಆರ್ (UDR) ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.
