ಕಾರವಾರ: ಮನೆಯ ಕಿಟಕಿ ಮುರಿದು ಒಳನುಗ್ಗಿದ ಕಳ್ಳರು ಅಡುಗೆ ಕೋಣೆಯಲ್ಲಿದ್ದ ಸುಮಾರು ₹20 ಸಾವಿರ ಮೌಲ್ಯದ ತಾಮ್ರ ಹಾಗೂ ಹಿತ್ತಾಳೆ ಸಾಮಗ್ರಿಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಕಾರವಾರ ತಾಲೂಕಿನ ಮುಡಗೇರಿ ರೋಡ್ ಅಂಗಡಿ ಗ್ರಾಮದಲ್ಲಿ ನಡೆದಿದೆ.
ಮುಡಗೇರಿ ರೋಡ್ ಅಂಗಡಿ ಗ್ರಾಮದ ನಿವಾಸಿ ತಿಲಕ ಶಿವಪ್ರಸಾದ ಬೇಹರಾ (30) ಅವರು ನೀಡಿದ ದೂರಿನ ಪ್ರಕಾರ, ಆಗಸ್ಟ್ 9ರ ರಾತ್ರಿ 8 ಗಂಟೆಯಿಂದ ಆಗಸ್ಟ್ 16ರ ಮಧ್ಯಾಹ್ನ 12.30ರ ನಡುವಿನ ಅವಧಿಯಲ್ಲಿ ಕಳ್ಳತನ ನಡೆದಿದೆ. ಮನೆಯವರು ಇಲ್ಲದಿರುವುದನ್ನು ಗಮನಿಸಿದ ಕಳ್ಳರು, ಮನೆಯ ಕಿಟಕಿಯನ್ನು ಮುರಿದು ಒಳನುಗ್ಗಿ ಕಳ್ಳತನ ನಡೆಸಿದ್ದಾರೆ ಎನ್ನಲಾಗಿದೆ.
ಮನೆಯ ಅಡುಗೆ ಕೋಣೆಯಲ್ಲಿದ್ದ ಸುಮಾರು ₹20 ಸಾವಿರ ಮೌಲ್ಯದ ತಾಮ್ರ ಹಾಗೂ ಹಿತ್ತಾಳೆ ಸಾಮಗ್ರಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಮನೆಗೆ ಮರಳಿದ ಬಳಿಕ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದ್ದು, ದೂರುದಾರರು ಅಕ್ಕಪಕ್ಕದವರನ್ನು ವಿಚಾರಿಸಿ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಚಿತ್ತಾಕುಲಾ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.
ಈ ಸಂಬಂಧ ಚಿತ್ತಾಕುಲಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 331(3), 331(4) ಹಾಗೂ 305(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದು, ಕಳ್ಳರ ಪತ್ತೆಗೆ ಮುಂದಾಗಿದ್ದಾರೆ.
