Spread the love

ಕಾರವಾರ: ಮನೋವೈದ್ಯಕೀಯ ಕ್ಷೇತ್ರದಲ್ಲಿನ ಹೊಸ ಬೆಳವಣಿಗೆಗಳು, ಕೃತಕ ಬುದ್ಧಿಮತ್ತೆ ಹಾಗೂ ಡಿಜಿಟಲ್ ತಂತ್ರಜ್ಞಾನದ ಬಳಕೆ ಸೇರಿದಂತೆ ವಿವಿಧ ಮಹತ್ವದ ವಿಚಾರಗಳ ಕುರಿತು ಚರ್ಚಿಸಲು ಮನೋರೋಗ ತಜ್ಞರ 36ನೇ ವಾರ್ಷಿಕ ರಾಜ್ಯಮಟ್ಟದ ಸಮ್ಮೇಳನ ಸೆಪ್ಟೆಂಬರ್ 4, 5 ಹಾಗೂ 6ರಂದು ಕಾರವಾರದಲ್ಲಿ ನಡೆಯಲಿದೆ ಎಂದು ಉತ್ತರ ಕನ್ನಡ ಮನೋವೈದ್ಯಕೀಯ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

ಸಮ್ಮೇಳನದ ಕುರಿತು ಮಂಗಳವಾರ ಕಾರವಾರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಾ. ವಿಜಯರಾಜ್, ಡಾ. ವಿಶಾಲ್ ವಿ., ಡಾ. ಅಕ್ಷಯ್ ಪಾಟಕ್ ಹಾಗೂ ಡಾ. ಸುಹಾನ್ ಅವರು, ಕರ್ನಾಟಕ ಭಾರತೀಯ ಮನೋವೈದ್ಯಕೀಯ ಸಂಘದ ಆಶ್ರಯದಲ್ಲಿ KANCIPS ಹೆಸರಿನಲ್ಲಿ ಮೂರು ದಿನಗಳ ಸಮ್ಮೇಳನ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮನೋರೋಗ ವಿಭಾಗದ ಪ್ರಾಧ್ಯಾಪಕರು ಹಾಗೂ ವಿಭಾಗದ ಅಧ್ಯಕ್ಷರಾದ ಡಾ. ವಿಜಯರಾಜ್, ಸಂತ ಇಗ್ನೀಶಿಯಸ್ ಆಸ್ಪತ್ರೆ ಹೊನ್ನಾವರದ ಮನೋರೋಗ ತಜ್ಞ ಡಾ. ವಿಶಾಲ್ ವಿ., ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮನೋರೋಗ ವಿಭಾಗದ ಸಹ ಪ್ರಾಧ್ಯಾಪಕ ಡಾ. ಅಕ್ಷಯ್ ಪಾಟಕ್ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋರೋಗ ತಜ್ಞ ಡಾ. ಸುಹಾನ್ ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

‘AI and Digital Psychiatry: Present and Future’ ಎಂಬುದು ಸಮ್ಮೇಳನದ ಪ್ರಮುಖ ವಿಚಾರವಾಗಿರಲಿದೆ. ಮನೋವೈದ್ಯಕೀಯ ಚಿಕಿತ್ಸೆಯಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಡಿಜಿಟಲ್ ತಂತ್ರಜ್ಞಾನದ ಇಂದಿನ ಬಳಕೆ ಮತ್ತು ಭವಿಷ್ಯದ ಸಾಧ್ಯತೆಗಳ ಕುರಿತು ತಜ್ಞರು ಚರ್ಚಿಸಲಿದ್ದಾರೆ.

ಸಮ್ಮೇಳನದ ಅಂಗವಾಗಿ ಕಳೆದ ನಾಲ್ಕು ತಿಂಗಳಿನಿಂದ ಉತ್ತರ ಕನ್ನಡ ಮನೋವೈದ್ಯಕೀಯ ಸಂಘದ ವತಿಯಿಂದ ಜಿಲ್ಲೆಯ ವಿವಿಧೆಡೆ ಸಾರ್ವಜನಿಕರಿಗೆ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಹಾಗೂ ಮಾಹಿತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಹಬ್ಬುವಾಡದ ಶಾಲೆಯಲ್ಲಿ ಡಾ. ವಿಜಯರಾಜ್ ಅವರು ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದ್ದು, ಶಿರಾಲಿ ಹಾಗೂ ಭಟ್ಕಳದಲ್ಲಿ ಡಾ. ದೀಪಿಕಾ ಕಲಕೂರ ಅವರು ಶಾಲಾ ಮಕ್ಕಳ ಪೋಷಕರಿಗಾಗಿ ಕಾರ್ಯಕ್ರಮ ನಡೆಸಿದ್ದಾರೆ.

ಶಿರಸಿಯಲ್ಲಿ ಡಾ. ದಿಲ್‌ಪ್ರೀತ್ ಹಾಗೂ ಡಾ. ಆಶಯ್ ತೆಲಾಂಗ ಅವರು ಯೋಗ, ಮಾನಸಿಕ ಆರೋಗ್ಯ, ಒತ್ತಡ ನಿರ್ವಹಣೆ ಹಾಗೂ ಆತ್ಮಹತ್ಯೆ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಿದ್ದಾರೆ. ಕಾರವಾರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಾ. ಅಕ್ಷಯ್ ಪಾಟಕ್ ಅವರು ಒತ್ತಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಇದರೊಂದಿಗೆ ಜಿಲ್ಲೆಯ ವಿವಿಧೆಡೆ ಹಲವು ಸಾರ್ವಜನಿಕ ಜಾಗೃತಿ ಕಾರ್ಯಕ್ರಮಗಳನ್ನು ಸಂಘದ ಸದಸ್ಯರು ಹಮ್ಮಿಕೊಂಡಿದ್ದಾರೆ ಎಂದು ತಿಳಿಸಿದರು.

ಸಮ್ಮೇಳನದ ಮೊದಲ ದಿನವಾದ ಸೆಪ್ಟೆಂಬರ್ 4ರಂದು ಸಾರ್ವಜನಿಕ ಮಾಹಿತಿ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಆಶಾ ಕಾರ್ಯಕರ್ತರು, ಪೊಲೀಸ್ ಸಿಬ್ಬಂದಿ ಹಾಗೂ ಶಿಕ್ಷಕರು ಭಾಗವಹಿಸಲಿದ್ದು, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾನಸಿಕ ಆರೋಗ್ಯ ವಿಭಾಗದ ವೈದ್ಯರು ತರಬೇತಿ ಹಾಗೂ ಮಾಹಿತಿ ನೀಡಲಿದ್ದಾರೆ. ಆತ್ಮಹತ್ಯೆ ತಡೆಗಟ್ಟುವಿಕೆಯಲ್ಲಿ ‘ಟೆಲಿ-ಮಾನಸ್’ ಸೌಲಭ್ಯವನ್ನು ಹೇಗೆ ಬಳಸಿಕೊಳ್ಳಬಹುದು ಎಂಬುದರ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆಯಲಿದೆ. ಕಾರ್ಯಕ್ರಮ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನಡೆಯಲಿದ್ದು, ಉಳಿದ ಕಾರ್ಯಕ್ರಮಗಳು ಕಾರವಾರದ ಹೋಟೆಲ್ ಅಜ್ಜಿ ಓಷನ್‌ನಲ್ಲಿ ನಡೆಯಲಿವೆ.

ಸೆಪ್ಟೆಂಬರ್ 5ರಂದು ಸಮ್ಮೇಳನದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಖ್ಯಾತ ಮನೋರೋಗ ತಜ್ಞ ಹಾಗೂ ಪದ್ಮಶ್ರೀ ಪುರಸ್ಕೃತ ಡಾ. ಸಿ.ಆರ್. ಚಂದ್ರಶೇಖರ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿ ಮಾನಸಿಕ ಆರೋಗ್ಯ ಆರೈಕೆಯಲ್ಲಿ ಸರ್ಕಾರ, ಖಾಸಗಿ ಸಂಸ್ಥೆಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳ ಪಾತ್ರದ ಕುರಿತು ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಸಮ್ಮೇಳನದ ವೇಳೆ ಹಿರಿಯ ಹಾಗೂ ಖ್ಯಾತ ಮನೋವೈದ್ಯರನ್ನು ಸನ್ಮಾನಿಸುವ ಕಾರ್ಯಕ್ರಮವೂ ನಡೆಯಲಿದೆ. ವೈದ್ಯರಲ್ಲದವರಿಂದ ನಡೆಸಲ್ಪಡುತ್ತಿರುವ ನಶಾಮುಕ್ತಿ ಕೇಂದ್ರಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ‘ಸ್ಪಂದನ ಪ್ರಶಸ್ತಿ’ ನೀಡಲಾಗುವುದು ಎಂದು ಸಂಘದ ಪದಾಧಿಕಾರಿಗಳು ತಿಳಿಸಿದರು.

ಇದರ ಜೊತೆಗೆ ಮನೋರೋಗ ತಜ್ಞರ ಶೈಕ್ಷಣಿಕ ಜ್ಞಾನವರ್ಧನೆ ಹಾಗೂ ಮನೋರೋಗ ವಿಭಾಗದಲ್ಲಿ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕವಾಗುವಂತೆ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳು, ವಿಚಾರ ಸಂಕಿರಣಗಳು ಹಾಗೂ ಚರ್ಚೆಗಳನ್ನು ಆಯೋಜಿಸಲಾಗಿದೆ. ಸಮ್ಮೇಳನದ ಎಲ್ಲ ಕಾರ್ಯಕ್ರಮಗಳನ್ನು ನಡೆಸಲು ಅಗತ್ಯವಿರುವ ಸಾರ್ವಜನಿಕ ಸಂಸ್ಥೆಗಳ ಅನುಮತಿಗಳನ್ನು ಸಂಘ ಪಡೆದುಕೊಂಡಿದೆ ಎಂದು ಅವರು ಹೇಳಿದರು.

ಕರ್ನಾಟಕ ಭಾರತೀಯ ಮನೋವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಅನಿಲ್ ಎಂ. ನಾಗರಾಜ್, ಕಾರ್ಯದರ್ಶಿ ಡಾ. ನಾರಾಯಣ್ ಮುತಾಲಿಕ್ ಹಾಗೂ KANCIPS ವೈಜ್ಞಾನಿಕ ಸಮಿತಿ ಅಧ್ಯಕ್ಷ ಡಾ. ರಂಗನಾಥ್ ಕುಲಕರ್ಣಿ ಅವರ ಮುತುವರ್ಜಿಯಲ್ಲಿ ಸಮ್ಮೇಳನ ನಡೆಯಲಿದೆ ಎಂದು ಸಂಘದ ಪದಾಧಿಕಾರಿಗಳು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *