ಕಾರವಾರ: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಬೃಹತ್ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ್ ಅವರು ಸಕ್ರಿಯವಾಗಿ ಭಾಗವಹಿಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಸರ್ಕಾರದ ಗ್ಯಾರಂಟಿ ಯೋಜನೆಗಳು, ನಿರುದ್ಯೋಗ ಸಮಸ್ಯೆ ಹಾಗೂ ರೈತರ ಸಂಕಷ್ಟಗಳ ಕುರಿತು ಜನಸಾಮಾನ್ಯರ ಧ್ವನಿಯಾಗಿ ಅವರು ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು.
ಕೇವಲ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುವುದರಿಂದ ಪ್ರತಿಯೊಂದು ಕುಟುಂಬದ ಬದುಕು ಹಸನಾಗುವುದಿಲ್ಲ. ಉಚಿತ ಯೋಜನೆಗಳಿಗಿಂತ ಹೆಚ್ಚಾಗಿ, ಪ್ರತಿ ಮನೆಯ ಒಬ್ಬರಿಗಾದರೂ ಉದ್ಯೋಗ ದೊರಕುವಂತಹ ಸುಭದ್ರ ವ್ಯವಸ್ಥೆ ನಿರ್ಮಾಣವಾಗಬೇಕು. ಯುವಜನತೆಗೆ ಉದ್ಯೋಗ ಸಿಕ್ಕಾಗ ಮಾತ್ರ ಆ ಕುಟುಂಬವು ಯಾರ ಹಂಗಿಲ್ಲದೆ ತನ್ನ ಬದುಕನ್ನು ಸ್ವಾಭಿಮಾನದಿಂದ ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಸರ್ಕಾರದ ಆರ್ಥಿಕ ನೀತಿಗಳನ್ನು ಕಟುವಾಗಿ ಟೀಕಿಸಿದರು.
ರೈತರ ಸಮಸ್ಯೆಗಳ ಕುರಿತು ಮಾತನಾಡಿದ ಅವರು, ಸರ್ಕಾರ ಕೇವಲ ಸಮೀಕ್ಷೆಗಳ ನೆಪದಲ್ಲಿ ಕಾಲಹರಣ ಮಾಡುವುದನ್ನು ಬಿಟ್ಟು, ಮೊದಲು ಅನ್ನದಾತನ ಬೆವರಿನ ಬೆಳೆಗೆ ಸೂಕ್ತ ಬೆಲೆ ಹಾಗೂ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
ರೈತರ ಬದುಕಿಗೆ ಸ್ಥಿರತೆ, ಯುವಕರಿಗೆ ಉದ್ಯೋಗ ಹಾಗೂ ಪ್ರತಿಯೊಂದು ಕುಟುಂಬಕ್ಕೂ ಆರ್ಥಿಕ ಭದ್ರತೆ ನೀಡುವಂತಹ ಜನಪರ ಆಡಳಿತದ ಅಗತ್ಯವಿದೆ ಎಂದು ಪ್ರತಿಪಾದಿಸಿದ ಅವರು, ಜನಸಾಮಾನ್ಯರು, ಯುವಕರು ಹಾಗೂ ರೈತರ ಪರವಾಗಿ ತಮ್ಮ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ಎಚ್ಚರಿಸಿದರು.
